ಹೊನ್ನಾವರ : ಪಶ್ಚಿಮ ಘಟ್ಟದ ಪರಿಸರದ ದೃಷ್ಟಿಯಿಂದ ಅತಿ ಸಂವೇದನಾಶೀಲವೆಂದು ಪರಿಗಣಿಸಲ್ಪಡುವ ಶರಾವತಿ ಕಣಿವೆಯ ಸಿಂಗಳೀಕ (Lion-Tailed Macaque) ಅಭಯಾರಣ್ಯದಲ್ಲಿ ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಯಾವುದೇ ಕಾಮಗಾರಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಭಾಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಕುರಿತು ವಿಚಾರಣೆ ನಡೆಸಿ, ಮುಂದಿನ ಆದೇಶ ಹೊರಬರುವವರೆಗೂ ಅಭಯಾರಣ್ಯ ಅಥವಾ ಅದರ ಪರಿಸರ ಸೂಕ್ಷ್ಮ ವಲಯದಲ್ಲಿ ಯೋಜನೆ ಸಂಬಂಧಿತ ಚಟುವಟಿಕೆಗಳನ್ನು ಕೈಗೊಳ್ಳಬಾರದು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಪರಿಸರವಾದಿಗಳ ಸಾರ್ವಜನಿಕ ಹಿತಾಸಕ್ತಿ ಅರ್ಜಿ
ಪರಿಸರ ಸಂರಕ್ಷಣೆಯ ಪರವಾಗಿ ಕಾರ್ಯನಿರ್ವಹಿಸುವ ಅಖಿಲೇಶ್ ಚಿಪ್ಲಿ, ರವೀಂದ್ರನಾಥ ಶಾನಭಾಗ್ ಹಾಗೂ ಮನೋಹರ ಕುಮಾರ ಸಿ.ಬಿ. ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಆಧರಿಸಿ ನ್ಯಾಯಾಲಯ ಈ ಮಧ್ಯಂತರ ಆದೇಶ ಹೊರಡಿಸಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಬಿ.ವಿ. ವಿದ್ಯುಲ್ಲತಾ ವಾದ ಮಂಡಿಸಿದರು.
ಯೋಜನೆಯ ವ್ಯಾಪ್ತಿ ಮತ್ತು ಪರಿಸರ ಕಳವಳ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸುಮಾರು 142.763 ಹೆಕ್ಟೇರ್ ಭೂಮಿ ಅಗತ್ಯವಿದೆ. ಇದರಲ್ಲಿ ಸುಮಾರು 103 ಹೆಕ್ಟೇರ್ ಪ್ರದೇಶ ಸಿಂಗಳೀಕ ಅಭಯಾರಣ್ಯದ ಒಳಭಾಗದಲ್ಲೇ ಬರುತ್ತದೆ. ಉಳಿದ 39.715 ಹೆಕ್ಟೇರ್ ಪ್ರದೇಶ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿದೆ.ಅರ್ಜಿದಾರರು ಸಲ್ಲಿಸಿದ ಮಾಹಿತಿಯ ಪ್ರಕಾರ, ಯೋಜನೆ ಜಾರಿಗೆ ಬಂದರೆ ಬಂಡೆ ಸ್ಫೋಟ, ಸುರಂಗ ತೋಡುವುದು ಮತ್ತು ತ್ಯಾಜ್ಯ ವಿಸರ್ಜನೆ ಮುಂತಾದ ಕಾರ್ಯಗಳಿಂದ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ಸಿಂಗಳೀಕಗಳ ನೈಸರ್ಗಿಕ ಆವಾಸಸ್ಥಾನಕ್ಕೆ ಗಂಭೀರ ಹಾನಿಯಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಲಾಗಿದೆ.
ಕೇಂದ್ರ ಸರ್ಕಾರದ ಮಾಹಿತಿ:
ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ ಕಾಮತ್ ಹಾಜರಾಗಿ, ಈ ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಇನ್ನೂ ಅಂತಿಮ ಅನುಮೋದನೆ ಸಿಕ್ಕಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಯೋಜನೆಗೆ ಸಂಬಂಧಿಸಿದ ಕೆಲವು ಪ್ರಮುಖ ಪರಿಸರ ಸಂಬಂಧಿತ ಅಂಶಗಳ ಪರಿಶೀಲನೆ ನಡೆಯುತ್ತಿದೆ ಎಂಬ ಮಾಹಿತಿಯನ್ನೂ ಅವರು ನೀಡಿದರು.
ರಾಜ್ಯ ಸರ್ಕಾರದ ವಾದ:
ರಾಜ್ಯ ಸರ್ಕಾರದ ಪರ ಅಡ್ವಕೇಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ ಅವರು ಮಧ್ಯಂತರ ತಡೆ ನೀಡಬಾರದು ಎಂದು ನ್ಯಾಯಾಲಯವನ್ನು ಮನವಿ ಮಾಡಿದರು. ಮತ್ತೊಂದೆಡೆ, ಐದನೇ ಪ್ರತಿವಾದಿ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 29 ಅಡಿ ಕೆಲವು ಚಟುವಟಿಕೆಗಳಿಗೆ ಅವಕಾಶವಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ ತಮ್ಮ ವಾದ ಮಂಡಿಸಿದರು.
ಮುಂದಿನ ವಿಚಾರಣೆ ಜೂನ್ 10ಕ್ಕೆ:
ಎರಡೂ ಪಕ್ಷಗಳ ವಾದಗಳನ್ನು ಆಲಿಸಿದ ನ್ಯಾಯಪೀಠವು, ಯೋಜನೆಯಿಂದ ಪರಿಸರದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಗಂಭೀರ ಆತಂಕ ವ್ಯಕ್ತಪಡಿಸಿದೆ. ವಿಷಯದ ಸಮಗ್ರ ಪರಿಶೀಲನೆ ಅಗತ್ಯವಿದೆ ಎಂದು ಹೇಳಿ, ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 10, 2026 ರಂದು ನಡೆಸಲು ನ್ಯಾಯಾಲಯ ತೀರ್ಮಾನಿಸಿದೆ
