
ಭಟ್ಕಳ-ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ವಾಹನದ ಹಾರ್ನ್ ವಿಚಾರವಾಗಿ ಆರಂಭವಾದ ಸಣ್ಣ ವಿವಾದವು ಹಿಂಸಾತ್ಮಕ ತಿರುವು ಪಡೆದು, ಇಬ್ಬರು ಯುವಕರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗುರುವಾರ ಸಂಜೆ ಜಾಲಿ ಬೀಚ್ ರಸ್ತೆಯಲ್ಲಿ ವಾಹನದ ಹಾರ್ನ್ ಶಬ್ದದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಉಂಟಾದ ಅಸಮಾಧಾನವು ಬಳಿಕ ದೊಡ್ಡ ಮಟ್ಟದ ದ್ವೇಷಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
ರಾತ್ರಿ ಸಮಯದಲ್ಲಿ ಜಾಲಿ ದೇವಿನಗರ ಕ್ರಾಸ್ ಬಳಿ ಕೆಲವರು ಸ್ಕೂಟರ್ನಲ್ಲಿ ತೆರಳುತ್ತಿದ್ದ ಯುವಕರನ್ನು ತಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆರೋಪಿಗಳ ಗುಂಪು ಚಾಕು ಬಳಸಿ ದಾಳಿ ನಡೆಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆಯಲ್ಲಿ ತೌಸೀಫ್ ಖತೀಬ್ ಹಾಗೂ ಮುಹಮ್ಮದ್ ಜಾಫರ್ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

ಹಲ್ಲೆಯ ವೇಳೆ ಗಾಯಾಳುಗಳ ಬಳಿ ಇದ್ದ ಬೆಲೆಬಾಳುವ ವಸ್ತುಗಳು ಮತ್ತು ನಗದು ಕಳೆದುಹೋಗಿರುವ ಬಗ್ಗೆ ದೂರು ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ತಿಳಿಯುತ್ತಿದ್ದಂತೆ ಹಲವರು ಆಸ್ಪತ್ರೆಗೆ ಹಾಗೂ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದರು. ಪರಿಸ್ಥಿತಿಯನ್ನು ಗಮನಿಸಿದ ಪೊಲೀಸರು ಹೆಚ್ಚುವರಿ ಭದ್ರತೆ ಒದಗಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.
