
ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ 32 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪತ್ನಿ ಮತ್ತು ಆಕೆಯ ತಾಯಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.

ಮೃತರನ್ನು ರಾಘವೇಂದ್ರ ವಾಡಕರ್ ಎಂದು ಗುರುತಿಸಲಾಗಿದೆ. ಅವರು ಮೇ 1ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕುಟುಂಬದವರ ದೂರಿನ ಪ್ರಕಾರ, ರಾಘವೇಂದ್ರ ಹಾಗೂ ಮೇಘಾ ವಾಡಕರ್ ಏಳು ವರ್ಷಗಳ ಹಿಂದೆ ವಿವಾಹವಾಗಿದ್ದರು. ದಾಂಪತ್ಯ ಜೀವನದಲ್ಲಿ ಉಂಟಾದ ಭಿನ್ನಾಭಿಪ್ರಾಯಗಳಿಂದಾಗಿ ಇಬ್ಬರೂ ಹಲವು ವರ್ಷಗಳಿಂದ ಪ್ರತ್ಯೇಕವಾಗಿದ್ದರು ಎನ್ನಲಾಗಿದೆ. ಈ ಅವಧಿಯಲ್ಲಿ ಪರಸ್ಪರ ಬೆದರಿಕೆ, ಮಾನಸಿಕ ಒತ್ತಡ ಮತ್ತು ಕಲಹಗಳು ನಡೆದಿರುವುದಾಗಿ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಮೃತರು ಸಾವಿಗೂ ಮುನ್ನ ತಮ್ಮ ಜೀವನದ ಕುರಿತು ಬರಹ ಬರೆದಿದ್ದು, ಅದರಲ್ಲಿ ಪತ್ನಿ ಹಾಗೂ ಆಕೆಯ ತಾಯಿಯಿಂದ ಮಾನಸಿಕ ಹಿಂಸೆ ಅನುಭವಿಸಿರುವುದಾಗಿ ಉಲ್ಲೇಖಿಸಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ.
ಈ ಕುರಿತು ಮೃತರ ಸಹೋದರಿ ನರ್ಮದಾ ವಾಡಕರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪತ್ನಿ ಮೇಘಾ ವಾಡಕರ್ ಹಾಗೂ ಆಕೆಯ ತಾಯಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.ಪ್ರಕರಣದ ನಿಖರ ಕಾರಣಗಳು ಮತ್ತು ಆರೋಪಗಳ ಸತ್ಯಾಸತ್ಯತೆ ಕುರಿತು ಪೊಲೀಸ್ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.
