
ಭಟ್ಕಳ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟಿಹಕ್ಲ ಸಮೀಪದ ವೆಂಕಟಾಪುರ ನದಿಯಲ್ಲಿ ಭಾನುವಾರ ಭೀಕರ ದುರಂತ ಸಂಭವಿಸಿದೆ. ಕಪ್ಪೆಚಿಪ್ಪು (ಮಳ್ವಿ) ತೆಗೆಯಲು ನದಿಗೆ ಇಳಿದಿದ್ದವರಲ್ಲಿ ಎಂಟು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರು ಶಿರಾಲಿಯ ಸಾರದಹೊಳೆ ಮೂಲದವರು ಎಂದು ತಿಳಿದುಬಂದಿದೆ. ಒಟ್ಟು 14 ಮಂದಿ ಗುಂಪಾಗಿ ನದಿಗೆ ತೆರಳಿದ್ದ ವೇಳೆ ಅಕಸ್ಮಿಕವಾಗಿ ನೀರಿನ ಸೆಳೆತ ಹೆಚ್ಚಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇನ್ನೂ ಮೂವರನ್ನು ಸ್ಥಳೀಯರು ರಕ್ಷಿಸಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ನದಿಯ ತೀರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಭಟ್ಕಳ ಇತಿಹಾಸದಲ್ಲೇ ಇದೊಂದು ಕರಾಳ ದಿನವೆಂದು ಸ್ಥಳೀಯರು ಕಣ್ಣೀರಿಟ್ಟಿದ್ದಾರೆ. ಮೃತರೆಲ್ಲರೂ ಶ್ರಮಜೀವಿಗಳಾಗಿದ್ದು, ದಿನನಿತ್ಯದ ಬದುಕಿಗಾಗಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ ವೇಳೆ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.ನಾಪತ್ತೆಯಾದವರಿಗಾಗಿ ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
