ಭಟ್ಕಳ: ಕಪ್ಪೆಚಿಪ್ಪು ಮೀನುಗಾರಿಕೆಗೆ ತೆರಳಿದ್ದ ವೇಳೆ ಸಂಭವಿಸಿದ ಭೀಕರ ದುರಂತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಮೃತರಲ್ಲಿ ಒಂದೇ ಕುಟುಂಬದ ಎಂಟು ಮಂದಿ ಸೇರಿರುವುದು ದುಃಖವನ್ನು ಇನ್ನಷ್ಟು ಗಂಭೀರಗೊಳಿಸಿದೆ.

ದುರಂತದ ಸುದ್ದಿ ತಿಳಿದ ತಕ್ಷಣ ಭೀಮಣ್ಣ ಟಿ. ನಾಯ್ಕ್ ಅವರು ಭಟ್ಕಳದಲ್ಲಿರುವ ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಕುಟುಂಬದವರ ದುಃಖವನ್ನು ಆಲಿಸಿದ ಅವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸಿದರು.
ಮೃತರ ಬಂಧುಗಳ ಆಕ್ರಂದನ ಕಂಡು ಸ್ಥಳದಲ್ಲಿದ್ದವರ ಕಣ್ಣಲ್ಲೂ ನೀರು ತುಂಬಿತು. ಗ್ರಾಮಸ್ಥರು ಮೃತರ ನೆನಪುಗಳನ್ನು ಸ್ಮರಿಸುತ್ತಿದ್ದು, ಭಟ್ಕಳ ಪ್ರದೇಶದಲ್ಲಿ ಶೋಕಮಯ ವಾತಾವರಣ ನಿರ್ಮಾಣವಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ್ ಅವರು, “ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದ ಮಟ್ಟದಲ್ಲಿ ಗರಿಷ್ಠ ಪರಿಹಾರ ಮತ್ತು ನೆರವು ದೊರಕಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸ್ಥಳೀಯ ಶಾಸಕರು ಹಾಗೂ ಸಚಿವರಾದ ಮಂಕಾಳ್ ವೈದ್ಯ ಅವರೊಂದಿಗೆ ಚರ್ಚಿಸಿ ಸರ್ಕಾರದ ಗಮನ ಸೆಳೆಯುತ್ತೇನೆ,” ಎಂದು ಹೇಳಿದರು.ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಜಿಲ್ಲೆಯ ಜನತೆ ಪ್ರಾರ್ಥಿಸುತ್ತಿದ್ದು, ದುಃಖದಲ್ಲಿರುವ ಕುಟುಂಬಗಳ ಜೊತೆ ಇಡೀ ಉತ್ತರ ಕನ್ನಡ ಜಿಲ್ಲೆ ನಿಂತಿದೆ.

