
ಶಿರಸಿ, ಜೂನ್ 14: ಶಿರಸಿ–ಸಿದ್ದಾಪುರ ಕ್ಷೇತ್ರದ ವಿವಿಧ ಭಾಗಗಳಲ್ಲಿ ಅಕ್ರಮ ಸಾರಾಯಿ ಸೇವನೆ ಮತ್ತು ಮಾರಾಟ ಹೆಚ್ಚಾಗುತ್ತಿದ್ದು, ಇದರ ಪರಿಣಾಮವಾಗಿ ರೈತರು, ಬಡವರು ಹಾಗೂ ಕೂಲಿಕಾರರು ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ. ಹಲವರು ಕಿಡ್ನಿ ಹಾಗೂ ಲಿವರ್ ಸಂಬಂಧಿತ ಸಮಸ್ಯೆಗಳಿಗೆ ತುತ್ತಾಗಿದ್ದು, ಕೆಲವು ಸಾವುಗಳೂ ಸಂಭವಿಸಿರುವುದಾಗಿ ಹೋರಾಟಗಾರರು ಆರೋಪಿಸಿದ್ದಾರೆ.

ಇದೇ ವೇಳೆ ಇತ್ತೀಚಿನ ದಿನಗಳಲ್ಲಿ ಗಾಂಜಾ ಹಾಗೂ ಡ್ರಗ್ಸ್ ಬಳಕೆ ಹೆಚ್ಚುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಾರ್ವಜನಿಕರು, ಇವುಗಳ ಪೂರೈಕೆ ಜಾಲವನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ತಾಲೂಕಿನ ಹಲವು ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತ ಡ್ರಗ್ಸ್ ಹಾಗೂ ಗಾಂಜಾ ಹಾವಳಿ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪಾಲಕರಲ್ಲಿ ಆತಂಕ ಹೆಚ್ಚಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಳೆದ ಎರಡು ವರ್ಷಗಳಿಂದ ಹೆಚ್ಚುತ್ತಿರುವ ಅಕ್ರಮ ಮಟ್ಕಾ , ಅಕ್ರಮ ಜೂಜಾಟ ಹಾಗೂ ಅನೈತಿಕ ಚಟುವಟಿಕೆಗಳನ್ನು ತಕ್ಷಣ ನಿಯಂತ್ರಿಸಬೇಕು ಎಂದು ಒತ್ತಾಯಿಸಿ ಅನಂತ ಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಜೂನ್ 16, 2026ರಂದು ಬೆಳಿಗ್ಗೆ 11 ಗಂಟೆಗೆ ಶಿರಸಿ ಸಹಾಯಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ನಂತರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಲಾಗಿದೆ.ಪ್ರತಿಭಟನೆಯಲ್ಲಿ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

