ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮಿಥುನ ಪುಟ್ಟಪ್ಪ ನಾಯ್ಕ ಮೃತಪಟ್ಟ ಘಟನೆಗೆ ಸಂಬಂಧಿಸಿ, ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಲೇ ಮಗನನ್ನು ಕಳೆದುಕೊಂಡೆ ಎಂದು ಮೃತ ಬಾಲಕನ ತಂದೆ ಪುಟ್ಟಪ್ಪ ನಾಯ್ಕ ಆರೋಪಿಸಿದ್ದಾರೆ.

ತಮ್ಮ ನೋವನ್ನು ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರ ಎದುರು ಹಂಚಿಕೊಂಡ ಅವರು, ರಾತ್ರಿ ವೇಳೆ ಇಬ್ಬರು ಮಕ್ಕಳಿಗೂ ವಾಂತಿ ಕಾಣಿಸಿಕೊಂಡಿದ್ದು, ಆರಂಭದಲ್ಲಿ ಆಹಾರದಲ್ಲಿ ವ್ಯತ್ಯಾಸವಾಗಿರಬಹುದು ಎಂದು ಭಾವಿಸಿದ್ದಾಗಿ ತಿಳಿಸಿದ್ದಾರೆ. ಬಳಿಕ ಮನೆಯ ಸಮೀಪ ಹಾವು ಕಂಡುಬಂದ ಹಿನ್ನೆಲೆಯಲ್ಲಿ ಬೆಳಗಿನ ಜಾವ ಸುಮಾರು 4:45ಕ್ಕೆ ಶಿರಸಿಯ ಪಂಡಿತ ಸರ್ಕಾರಿ ಆಸ್ಪತ್ರೆಗೆ ಮಗ ಹಾಗೂ ಮಗಳನ್ನು ಕರೆದುಕೊಂಡು ಹೋಗಿದ್ದಾಗಿ ಹೇಳಿದರು.
ಆಸ್ಪತ್ರೆಗೆ ತಲುಪಿದಾಗ ವೈದ್ಯರು ತಕ್ಷಣ ಲಭ್ಯವಾಗಲಿಲ್ಲ. ಬಳಿಕ ಚಿಕಿತ್ಸೆ ಆರಂಭವಾದರೂ, ಮಗನ ಕಿವಿಯ ಹತ್ತಿರ ಕಚ್ಚಿದ ಗಾಯವಿದ್ದ ವಿಚಾರ ತಿಳಿಸಿದರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ತಂದೆ ಆರೋಪಿಸಿದ್ದಾರೆ.

ಕೆಲ ಸಮಯದ ಬಳಿಕ ಬಾಲಕನ ಆರೋಗ್ಯ ಹದಗೆಟ್ಟಿದ್ದು, ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಕಾರವಾರ ಅಥವಾ ಹುಬ್ಬಳ್ಳಿಗೆ ಕರೆದೊಯ್ಯುವಂತೆ ಸೂಚಿಸಿದರೆಂದು ತಿಳಿಸಿದ್ದಾರೆ. ನಂತರ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಆತ ಈಗಾಗಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾಗಿ ತಂದೆ ಹೇಳಿದ್ದಾರೆ. ಇದೇ ವೇಳೆ ಹಾವು ಕಚ್ಚಿದ್ದ ಮಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಆಕೆ ಗುಣಮುಖಳಾಗಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.ಈ ಘಟನೆ ಕುರಿತು ತಂದೆ ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದ್ದು, “ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಕ್ಕಿದ್ದರೆ ಮಗ ಬದುಕುತ್ತಿದ್ದ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ನಡುವೆ ದುಃಖಿತ ಕುಟುಂಬಕ್ಕೆ ಭೇಟಿ ನೀಡಿದ ಬಿಜಿಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿದರು. ಅಲ್ಲದೇ ಮಗಳ ಮುಂದಿನ ಚಿಕಿತ್ಸೆಗೆ ಅಗತ್ಯವಿದ್ದರೆ ನೆರವು ನೀಡುವುದಾಗಿ ಭರವಸೆ ನೀಡಿದರು.


