ಭಟ್ಕಳ: ಸಾಮಾಜಿಕ ಹೋರಾಟಗಾರ ಹಾಗೂ ಚಿತ್ರನಟ ಚೇತನ ಅಹಿಂಸಾ ಅವರು ಭಟ್ಕಳ ಪ್ರವಾಸದ ವೇಳೆ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವ ಉದ್ದೇಶವನ್ನು ಪ್ರಕಟಿಸಿದರು. ರಾಜ್ಯದ ಆಡಳಿತ ವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಶೋಷಿತ ಮತ್ತು ಅಂಚಿನ ಸಮುದಾಯಗಳ ಧ್ವನಿಯನ್ನು ಮುಖ್ಯವಾಹಿನಿಗೆ ತರುವ ಗುರಿಯೊಂದಿಗೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಜನರೊಂದಿಗೆ ನೇರ ಸಂವಾದ ನಡೆಸಿ, ಅವರ ಮೂಲಭೂತ ಸಮಸ್ಯೆಗಳನ್ನು ಅರಿತುಕೊಂಡು ಅವುಗಳ ಪರಿಹಾರಕ್ಕಾಗಿ ರಾಜ್ಯವ್ಯಾಪಿ ಜನಾಂದೋಲನ ರೂಪಿಸುವ ಯೋಜನೆ ಇದೆ ಎಂದು ಅವರು ಹೇಳಿದರು. ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ನಡೆಸುವುದು ತಮ್ಮ ರಾಜಕೀಯ ಚಟುವಟಿಕೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿರಲಿದೆ ಎಂದರು.

ಭಟ್ಕಳ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಚೇತನ ಅವರನ್ನು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ದಲಿತ ಮುಖಂಡರಾದ ಮಾದೇವ ಬಾಕಡ್, ವೆಂಕಟೇಶ್, ಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ವೇಳೆ ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಿದ ಚೇತನ, ಅಭಿವೃದ್ಧಿಯ ಹೆಸರಿನಲ್ಲಿ ಬಂಡವಾಳಶಾಹಿಗಳಿಗೆ ಅನುಕೂಲವಾಗುವ ಯೋಜನೆಗಳನ್ನು ಸರ್ಕಾರ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು. ಪರಿಸರಕ್ಕೆ ಹಾನಿ ಉಂಟುಮಾಡುವ ಯಾವುದೇ ಯೋಜನೆಗಳಿಗೆ ಅವಕಾಶ ನೀಡಬಾರದು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದರು.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತು ಪ್ರತಿಕ್ರಿಯಿಸಿದ ಅವರು, ಸಾವಿರಾರು ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಿಂದ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಇದಕ್ಕೆ ಪರ್ಯಾಯವಾಗಿ ಸೌರಶಕ್ತಿ ಸೇರಿದಂತೆ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನಾ ವಿಧಾನಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಈ ವಿಷಯವಾಗಿ ಸುಮಾರು 30 ಪರಿಸರವಾದಿಗಳ ನಿಯೋಗದೊಂದಿಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಲಾಗುವುದು ಎಂದರು.
ರಾಜಕೀಯ ವಿಚಾರಗಳ ಕುರಿತು ಮಾತನಾಡಿದ ಅವರು, ಅಂಡಮಾನ್ನಲ್ಲಿ ಇದೇ ರೀತಿಯ ಯೋಜನೆಗಳನ್ನು ವಿರೋಧಿಸುವ ನಾಯಕರು ರಾಜ್ಯದಲ್ಲಿ ಇಂತಹ ಯೋಜನೆಗಳಿಗೆ ಬೆಂಬಲ ನೀಡುತ್ತಿರುವುದು ವೈಪರೀತ್ಯವಾಗಿದೆ ಎಂದು ಟೀಕಿಸಿದರು. ಟೊಂಕಾ ಬಂದರು ಯೋಜನೆ ಸಂಬಂಧ ಕಾಂಗ್ರೆಸ್ ನಾಯಕರು ಈ ಹಿಂದೆ ನೀಡಿದ್ದ ಭರವಸೆಗಳು ಈಡೇರಿಲ್ಲ ಎಂಬ ಆರೋಪವನ್ನೂ ಮಾಡಿದರು.

ಕಾವೇರಿ ನೀರಿನ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಚೇತನ, ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ವೈಮನಸ್ಸು ಹೆಚ್ಚದಂತೆ ಉಭಯ ರಾಜ್ಯಗಳ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು ಎಂದು ಸಲಹೆ ನೀಡಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕರಾವಳಿ ಭಾಗ ಹಾಗೂ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ದೊರೆತಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಮುಂಬರುವ ದಿನಗಳಲ್ಲಿ “ಪರಿವರ್ತನಾ ಪರಿಸರವಾದ” ಸಿದ್ಧಾಂತವನ್ನು ಆಧಾರವಾಗಿಟ್ಟುಕೊಂಡು ಹೊಸ ರಾಜಕೀಯ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿರುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು.
