ಶಿರಸಿ: ನಗರದ ವಿವಿಧೆಡೆ ರಸ್ತೆಗಳಲ್ಲಿ ಉಂಟಾಗಿರುವ ಹೊಂಡಗಳನ್ನು ಸಾರ್ವಜನಿಕರು ಹಾಗೂ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೇ ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿರುವುದು ಆಡಳಿತ ವ್ಯವಸ್ಥೆಯ ಕಾರ್ಯವೈಖರಿಗೆ ಪ್ರಶ್ನೆ ಮೂಡಿಸಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಆರೋಪಿಸಿದ್ದಾರೆ.

ಈ ಕುರಿತು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಅವರು, ಶಿರಸಿ–ಸಿದ್ದಾಪುರ ಕ್ಷೇತ್ರ ವ್ಯಾಪ್ತಿಯ ಹಲವು ರಸ್ತೆಗಳು ಹೊಂಡಗಳಿಂದ ಕೂಡಿದ್ದು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದ್ದಾರೆ.
ಶಿರಸಿ–ಸಿದ್ದಾಪುರ ಮುಖ್ಯ ರಸ್ತೆಯ ಅಜ್ಜಿಬಳ ಸಮೀಪ ರಸ್ತೆ ಹೊಂಡದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆಯನ್ನು ಉಲ್ಲೇಖಿಸಿರುವ ಅವರು, ಇನ್ನಷ್ಟು ಅಪಘಾತಗಳು ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆಗಳು ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಶಿರಸಿಯ ಐದು ರಸ್ತೆ ವೃತ್ತದಲ್ಲಿಯೂ ದೊಡ್ಡ ಪ್ರಮಾಣದ ಹೊಂಡಗಳು ನಿರ್ಮಾಣವಾಗಿದ್ದು, ಅವುಗಳನ್ನು ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಸೇರಿ ಮುಚ್ಚಿದ ಘಟನೆ ಆಡಳಿತದ ನಿರ್ಲಕ್ಷ್ಯಕ್ಕೆ ಉದಾಹರಣೆಯಾಗಿದೆ ಎಂದು ಅವರು ಟೀಕಿಸಿದ್ದಾರೆ. ಗ್ರಾಮೀಣ ಭಾಗಗಳಲ್ಲಿಯೂ ರಸ್ತೆ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಅವರು, ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇದೇ ವೇಳೆ, ಶಿರಸಿ ಭಾಗದಲ್ಲಿ ಸಮರ್ಪಕ ಬಸ್ ಸೇವೆ ದೊರೆಯದಿರುವುದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. ಶಾಲಾ-ಕಾಲೇಜುಗಳಿಗೆ ಸಾರಿಗೆ ಬಸ್ಗಳನ್ನೇ ಅವಲಂಬಿಸಿರುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ಗಳು ಸಿಗದಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಬಸ್ ಸೇವೆ ಕುರಿತು ಪ್ರಶ್ನಿಸುವ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸುವ ಬದಲು ಅವರನ್ನು ಗದರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ. ಜನರಿಗೆ ಉತ್ತಮ ಆಡಳಿತ ನೀಡುವ ಹೊಣೆಗಾರಿಕೆ ಹೊಂದಿರುವ ಸರ್ಕಾರ ವಿದ್ಯಾರ್ಥಿಗಳ ಸಾರಿಗೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಸ್ತೆ ದುರಸ್ತಿ ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿರುವ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಗಮನಿಸಿ ಪರಿಹರಿಸಬೇಕು. ಇಲ್ಲವಾದರೆ ಅವ್ಯವಸ್ಥೆಗಳ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಅನಂತಮೂರ್ತಿ ಹೆಗಡೆ ಎಚ್ಚರಿಕೆ ನೀಡಿದ್ದಾರೆ.

