ಬೆಂಗಳೂರು: ಕರ್ನಾಟಕ ಪ್ರೆಸ್ ಕ್ಲಬ್ (ರಿ), ಬೆಂಗಳೂರು ತನ್ನ ಸಂಘಟನಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕರಾವಳಿ ಕರ್ನಾಟಕ ಭಾಗಕ್ಕೆ ಹೊಸ ಜವಾಬ್ದಾರಿಗಳನ್ನು ಘೋಷಿಸಿದೆ.

ಕರಾವಳಿ ಕರ್ನಾಟಕ ವಿಭಾಗದ ಅಧ್ಯಕ್ಷರಾಗಿ ಕುಮಾರ್ ನಾಯ್ಕ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸಂಚಾಲಕರಾಗಿ ರೂಪೇಶ್ ಕಲ್ಮಾಡಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಜಿ. ಅವರು ಈ ಕುರಿತು ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಪತ್ರಿಕಾ ಕ್ಷೇತ್ರದ ಮೂಲ ಆಶಯಗಳಾದ ನ್ಯಾಯ, ನೀತಿ, ಸತ್ಯನಿಷ್ಠೆ ಹಾಗೂ ಪತ್ರಿಕಾ ಧರ್ಮವನ್ನು ಗೌರವಿಸಿ, ವಹಿಸಿಕೊಂಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ನೂತನ ಪದಾಧಿಕಾರಿಗಳಿಗೆ ಸೂಚಿಸಲಾಗಿದೆ.ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಂಘಟನೆಯನ್ನು ಬಲಪಡಿಸುವುದು, ಪತ್ರಕರ್ತರು ಸಂಕಷ್ಟ ಅಥವಾ ಸಮಸ್ಯೆಗಳನ್ನು ಎದುರಿಸಿದ ಸಂದರ್ಭದಲ್ಲಿ ಅಗತ್ಯ ನೆರವು ನೀಡುವುದು ಹಾಗೂ ಪತ್ರಕರ್ತರ ಹಕ್ಕು ಮತ್ತು ಹಿತಾಸಕ್ತಿಗಳ ಪರವಾಗಿ ಸಂಘಟಿತವಾಗಿ ಕಾರ್ಯನಿರ್ವಹಿಸುವುದು ನೂತನ ಪದಾಧಿಕಾರಿಗಳ ಪ್ರಮುಖಕರ್ತವ್ಯಗಳಾಗಿವೆ.ಇದರೊಂದಿಗೆ ಸಮಾಜದ ಬಡವರು ಮತ್ತು ದುರ್ಬಲ ವರ್ಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳಿಗೆ ಧ್ವನಿಯಾಗುವುದು ಹಾಗೂ ಭ್ರಷ್ಟಾಚಾರ ಮತ್ತು ಅಕ್ರಮಗಳ ವಿರುದ್ಧ ಕಾನೂನುಬದ್ಧ ಹಾಗೂ ಜವಾಬ್ದಾರಿಯುತ ರೀತಿಯಲ್ಲಿ ಹೋರಾಟ ನಡೆಸುವ ನಿಟ್ಟಿನಲ್ಲಿಯೂ ಕಾರ್ಯನಿರ್ವಹಿಸುವಂತೆ ಸಂಘಟನೆ ಸೂಚಿಸಿದೆ.

ಕರಾವಳಿ ಭಾಗದಲ್ಲಿ ಹೊಸ ಜವಾಬ್ದಾರಿಗಳನ್ನು ವಹಿಸಿಕೊಂಡಿರುವ ಕುಮಾರ್ ನಾಯ್ಕ್ ಮತ್ತು ರೂಪೇಶ್ ಕಲ್ಮಾಡಿ ಅವರ ನೇತೃತ್ವದಲ್ಲಿ ಪತ್ರಕರ್ತರ ಸಂಘಟನೆ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂಬ ನಿರೀಕ್ಷೆಯನ್ನು ಕರ್ನಾಟಕ ಪ್ರೆಸ್ ಕ್ಲಬ್ ವ್ಯಕ್ತಪಡಿಸಿದೆ.

