
ಕಾರವಾರ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಕಾರವಾರದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಅನಿರೀಕ್ಷಿತ ಸಮಸ್ಯೆಯೊಂದನ್ನು ಎದುರಿಸಿದರು. ವೇದಿಕೆಯಲ್ಲಿ ಸಾಕಷ್ಟು ಬೆಳಕು ಇಲ್ಲದ ಕಾರಣ ಅವರು ತಾವು ತಂದಿದ್ದ ಭಾಷಣದ ಪ್ರತಿಯನ್ನು ಓದಲು ಸಾಧ್ಯವಾಗದೆ, ಕೆಲಕಾಲ ತಮ್ಮ ಮೊಬೈಲ್ನ ಟಾರ್ಚ್ ಬೆಳಕಿನ ನೆರವಿನಿಂದ ಭಾಷಣ ಮುಂದುವರಿಸಿದರು.

ಕಾರವಾರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕಾಗಿ ಮೈದಾನ ಹಾಗೂ ವೇದಿಕೆಯನ್ನು ವಿಶೇಷವಾಗಿ ಸಜ್ಜುಗೊಳಿಸಲಾಗಿತ್ತು. ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ವೇದಿಕೆಗೆ ಪೆಂಡಾಲ್ ಹಾಕಲಾಗಿತ್ತು. ಆದರೆ ಇದರಿಂದ ವೇದಿಕೆಯೊಳಗೆ ಬೆಳಕಿನ ಪ್ರಮಾಣ ಕಡಿಮೆಯಾಗಿತ್ತು.
ಪರೇಡ್ ವೀಕ್ಷಣೆ ಪೂರ್ಣಗೊಳಿಸಿದ ಬಳಿಕ ಸಚಿವರು ಭಾಷಣ ಆರಂಭಿಸಿದರು. ಸಿದ್ಧಪಡಿಸಿಕೊಂಡು ಬಂದಿದ್ದ ಭಾಷಣವನ್ನು ಓದಲು ಮುಂದಾದಾಗ ಅಕ್ಷರಗಳು ಸ್ಪಷ್ಟವಾಗಿ ಕಾಣಿಸದ ಹಿನ್ನೆಲೆಯಲ್ಲಿ ಕೆಲಕಾಲ ತಡವರಿಸಿದರು. ಪರಿಸ್ಥಿತಿ ಗಮನಿಸಿದ ಅವರು ಅಧಿಕಾರಿಗಳಿಗೆ ಬೆಳಕಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು.ಬೆಳಕು ವ್ಯವಸ್ಥೆಯಾಗಲು ಸ್ವಲ್ಪ ಸಮಯ ಬೇಕಾದ ಹಿನ್ನೆಲೆಯಲ್ಲಿ ಸಚಿವರು ಮೊಬೈಲ್ ಟಾರ್ಚ್ ಆನ್ ಮಾಡಿಕೊಂಡು ಭಾಷಣ ಓದುವುದನ್ನು ಮುಂದುವರಿಸಿದರು. ಬಳಿಕ ಅಧಿಕಾರಿಗಳು ವೇದಿಕೆಯಲ್ಲಿದ್ದ ಪೋಡಿಯಂ ಅನ್ನು ಧ್ವಜಸ್ತಂಭದ ಸಮೀಪಕ್ಕೆ ಸ್ಥಳಾಂತರಿಸಿದರು. ಅಲ್ಲಿ ಬೆಳಕು ಹೆಚ್ಚು ಇದ್ದ ಕಾರಣ ಸಚಿವರಿಗೆ ಭಾಷಣ ಓದಲು ಅನುಕೂಲವಾಯಿತು. ನಂತರ ಅವರು ತಮ್ಮ ಭಾಷಣವನ್ನು ಪೂರ್ಣಗೊಳಿಸಿದರು.

100 ದಿನಗಳಲ್ಲಿ ಆಡಳಿತಕ್ಕೆ ವೇಗ ನೀಡುವ ಗುರಿ
ತಮ್ಮ ಭಾಷಣದಲ್ಲಿ ರಾಜ್ಯ ಸರ್ಕಾರದ ಮುಂದಿನ ಆದ್ಯತೆಗಳ ಕುರಿತು ಮಾತನಾಡಿದ ಸವದಿ, ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸುವುದರ ಜೊತೆಗೆ ರೈತರು, ಯುವಜನತೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶವಿದೆ ಎಂದು ಹೇಳಿದರು.
ಮುಂದಿನ 100 ದಿನಗಳ ಅವಧಿಯಲ್ಲಿ ಆಡಳಿತ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.
ರೈತ ಮಿತ್ರ, ಬಡವರ ಬಂಧು, ಗ್ರಾಮಾನುಭವ, ಯುವ ಯುಗ ಯುವ ಕರ್ನಾಟಕ ನಿರ್ಮಾಣ, ಭಾರತ್ ಜೋಡೋ ಯುವಕ ಸಂಘ ಮಿಷನ್, ಯುವ ಉದ್ಯೋಗ ಸೇತು, ಸರ್ಕಾರಿ ಆಸ್ಪತ್ರೆಗಳ ದತ್ತು ಯೋಜನೆ, ನಶೆ ಮುಕ್ತ ಕರ್ನಾಟಕ, ಪ್ರಜಾ ಸೇವೆ ಇಲಾಖೆ, ಭೂ ಗ್ಯಾರಂಟಿ, ಕರ್ನಾಟಕ ಮೊಬಿಲಿಟಿ ಗ್ರಿಡ್ ಮಿಷನ್ ಹಾಗೂ ತೇಗದ ಸಿರಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುವುದು ಎಂದರು.
ಖಾಲಿ ಹುದ್ದೆಗಳ ಭರ್ತಿಗೆ ಕ್ರಮ
ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು. ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಯುವ ನೇಮಕಾತಿ ಪ್ರಕ್ರಿಯೆಗಳು ಪಾರದರ್ಶಕವಾಗಿರುವಂತೆ ನೋಡಿಕೊಳ್ಳಲಾಗುತ್ತಿದೆ. ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಹಲವು ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲಾಗುತ್ತಿದೆ ಎಂದರು.
ಉತ್ತರ ಕನ್ನಡದಲ್ಲಿ ಗ್ಯಾರಂಟಿ ಯೋಜನೆಗಳ ನೆರವು
ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಹಲವು ಕುಟುಂಬಗಳ ಆರ್ಥಿಕ ಪರಿಸ್ಥಿತಿಗೆ ನೆರವಾಗಿವೆ ಎಂದು ಸವದಿ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ₹639.88 ಕೋಟಿ, ಅನ್ನಭಾಗ್ಯ ಯೋಜನೆಯಡಿ ₹298.89 ಕೋಟಿ, ಯುವನಿಧಿ ಯೋಜನೆಯಡಿ ₹25.64 ಕೋಟಿ, ಗೃಹಲಕ್ಷ್ಮಿ ಯೋಜನೆಯಡಿ ₹1,811.84 ಕೋಟಿ ಹಾಗೂ ಗೃಹಜ್ಯೋತಿ ಯೋಜನೆಯಡಿ ₹641.45 ಕೋಟಿ ಮೊತ್ತದ ನೆರವು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮುಂಗಾರು ಕೊರತೆ; ಕುಡಿಯುವ ನೀರಿಗೆ ಮುನ್ನೆಚ್ಚರಿಕೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಅವಧಿಯಲ್ಲಿ ಶೇ.16ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ಸಚಿವರು ತಿಳಿಸಿದರು. ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಕುಡಿಯುವ ನೀರಿನ ಪೂರೈಕೆಗೆ 72 ಖಾಸಗಿ ಕೊಳವೆಬಾವಿಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ₹1 ಕೋಟಿ ಅನುದಾನ ನೀಡಲಾಗಿದೆ ಎಂದು ಹೇಳಿದರು.
ವಿಕೋಪ ಪರಿಸ್ಥಿತಿ ಎದುರಾದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲಾಗಿದೆ ಎಂದು ಅವರು ತಿಳಿಸಿದರು.
25 ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ
ಎಲ್ಕೆಜಿಯಿಂದ 12ನೇ ತರಗತಿವರೆಗೆ ಶಿಕ್ಷಣ ನೀಡುವ 25 ಶಾಲೆಗಳನ್ನು ಮೂಲಸೌಕರ್ಯ ಅಭಿವೃದ್ಧಿಗಾಗಿ ಗುರುತಿಸಲಾಗಿದೆ. ಸಿಎಸ್ಆರ್ ನಿಧಿಯ ಸಹಾಯದಿಂದ ಈ ಶಾಲೆಗಳ ಸೌಲಭ್ಯಗಳನ್ನು ಸುಧಾರಿಸುವ ಯೋಜನೆ ರೂಪಿಸಲಾಗಿದೆ ಎಂದು ಸಚಿವರು ಹೇಳಿದರು.
ಉದ್ಯಮಿಗಳು ಹಾಗೂ ಸಾರ್ವಜನಿಕರ ಸಹಕಾರ ಪಡೆದು ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಉದ್ಯೋಗ ಖಾತರಿ ಯೋಜನೆಯಡಿ ಸಾವಿರಾರು ಮಂದಿಗೆ ಕೆಲಸ
ಜಿಲ್ಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ 1.85 ಲಕ್ಷ ಮಾನವ ದಿನಗಳನ್ನು ಸೃಷ್ಟಿಸಲಾಗಿದ್ದು, 10,072 ಕೂಲಿಕಾರರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ವಿ.ಬಿ.ಜಿ. ರಾಮ್ಜಿ ಯೋಜನೆಯಡಿ 9,000 ಮಾನವ ದಿನಗಳನ್ನು ಸೃಷ್ಟಿಸಿ 1,089 ಕೂಲಿಕಾರರಿಗೆ ಕೆಲಸ ನೀಡಲಾಗಿದೆ. ಈ ಯೋಜನೆಗಳಡಿ ಒಟ್ಟಾರೆ ₹23.28 ಕೋಟಿ ವೆಚ್ಚ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಸುಮಾರು 12 ಸಾವಿರ ಕಾಮಗಾರಿಗಳು ವಿವಿಧ ಹಂತಗಳಲ್ಲಿ ನಡೆಯುತ್ತಿದ್ದು, ಬರ ನಿರ್ವಹಣೆ, ಪ್ರವಾಹ ನಿಯಂತ್ರಣ, ಭೂಕುಸಿತ ತಡೆ, ಅರಣೀಕರಣ, ವೈಯಕ್ತಿಕ ಫಲಾನುಭವಿಗಳಿಗೆ ಸಂಬಂಧಿಸಿದ ಕಾಮಗಾರಿಗಳು ಹಾಗೂ ಶಾಲಾ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಉತ್ತರ ಕನ್ನಡ ಜಿಲ್ಲೆಗೆ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾಗಿದ್ದು, ಯೋಜನೆಯ ಮೊದಲ ಹಂತಕ್ಕೆ ಸರ್ಕಾರ ₹100 ಕೋಟಿ ಬಿಡುಗಡೆ ಮಾಡಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದರು.
ಆಸ್ಪತ್ರೆಯಲ್ಲಿ ಎಂಆರ್ಐ ಮತ್ತು ಸಿಟಿ ಸ್ಕ್ಯಾನ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿವೆ. ಲಿನಾಕ್ ಬಂಕರ್ ಕಾಮಗಾರಿ ಮುಂದುವರಿದಿದ್ದು, ರೇಡಿಯಾಲಜಿ ಯಂತ್ರ ಅಳವಡಿಕೆ ಬಾಕಿಯಿದೆ. ಮುಂದಿನ ಹಂತದಲ್ಲಿ ಕ್ಯಾನ್ಸರ್ ಕೇರ್ ಘಟಕ ಸ್ಥಾಪಿಸುವ ಉದ್ದೇಶವಿದೆ ಎಂದು ಹೇಳಿದರು.
ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಗೃಹರಕ್ಷಕ ದಳ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.
ಉತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಭಾರತ್ ಜೋಡೋ ಯುವ ಮಿಷನ್ ಸದಸ್ಯತ್ವ ಕಾರ್ಡ್ಗಳನ್ನೂ ವಿತರಿಸಲಾಯಿತು.
ಕಾರ್ಯಕ್ರಮದ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ನಕ್ಷೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಡೈರೆಕ್ಟರಿಯನ್ನು ಬಿಡುಗಡೆ ಮಾಡಲಾಯಿತು.
ಬಾಲಮಂದಿರ ಪ್ರೌಢಶಾಲೆ ಮತ್ತು ಸೆಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ಕೆಎಸ್ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
