ಭಟ್ಕಳ: ಗಣೇಶ ವಿಗ್ರಹ ವಿಸರ್ಜನೆಗಾಗಿ ಸಾಗುತ್ತಿದ್ದ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ ಎನ್ನಲಾದ ಘಟನೆ ಬುಧವಾರ ರಾತ್ರಿ ಭಟ್ಕಳ ನಗರದಲ್ಲಿ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯಿಂದ ದೂರುಗಳು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಗಣೇಶ ವಿಗ್ರಹವನ್ನು ವಿಸರ್ಜನೆಗೆ ಕೊಂಡೊಯ್ಯಲಾಗುತ್ತಿತ್ತು. ಮೆರವಣಿಗೆ ಗುಳ್ಮಿ ರೈಲ್ವೆ ನಿಲ್ದಾಣ ರಸ್ತೆ ಮೂಲಕ ಮದರಸಾ ಮಾರ್ಗದಲ್ಲಿ ಸಾಗುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಘಟನೆಯಿಂದ ಕೆಲ ಸಮಯ ಸ್ಥಳದಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಈ ಕುರಿತು ಬಂದರ ರಸ್ತೆ ನಿವಾಸಿಗಳಾದ ಅಬ್ದುಲ್ ಅಲಿಂ ಮತ್ತು ಶಾಹುಲ್ ಅಮೀನ್ ಗವಾಯಿ ಅವರು ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಮೆರವಣಿಗೆ ಸಾಗುತ್ತಿದ್ದ ವೇಳೆ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಮತ್ತು ತಾಜುಸುನ್ನಾ ಅರೇಬಿಕ್ ಮದರಸಾ ಕಟ್ಟಡದತ್ತ ಕಲ್ಲುಗಳನ್ನು ಎಸೆಯಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದರಿಂದ ಕಟ್ಟಡದ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ದೂರು ದಾಖಲಾದ ಮಾಹಿತಿ ಹರಡುತ್ತಿದ್ದಂತೆ ಹಲವು ಮಂದಿ ಪೊಲೀಸ್ ಠಾಣೆಯ ಬಳಿ ಸೇರಿ, ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ವೇಳೆ ಪೊಲೀಸರು ಘಟನೆಯ ಹಿನ್ನೆಲೆ, ಮೆರವಣಿಗೆಯ ಮಾರ್ಗ ಹಾಗೂ ಲಭ್ಯವಿರುವ ಇತರ ಮಾಹಿತಿಯನ್ನು ಪರಿಶೀಲಿಸಿದರು.

ಇದೇ ವೇಳೆ ತಲಾಂದ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಾಜು ಸಂಕಪ್ಪ ನಾಯ್ಕ ಅವರು ಗುರುವಾರ ಮುಂಜಾನೆ ಪ್ರತಿದೂರು ದಾಖಲಿಸಿದ್ದಾರೆ. ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಕಟ್ಟಡವೊಂದರ ಮೇಲ್ಭಾಗದಿಂದ ಗಣೇಶ ವಿಗ್ರಹದತ್ತ ಕಲ್ಲುಗಳನ್ನು ಎಸೆಯಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಹೀಗಾಗಿ ಘಟನೆಯ ಕುರಿತು ಎರಡೂ ಕಡೆಯಿಂದ ಪರಸ್ಪರ ಆರೋಪಗಳು ವ್ಯಕ್ತವಾಗಿವೆ. ಪೊಲೀಸರು ಎರಡೂ ದೂರುಗಳನ್ನು ಪರಿಗಣಿಸಿ ತನಿಖೆ ಮುಂದುವರಿಸಿದ್ದಾರೆ. ತನಿಖೆ ಪೂರ್ಣಗೊಂಡು ಲಭ್ಯವಿರುವ ಸಾಕ್ಷ್ಯಗಳ ಪರಿಶೀಲನೆ ನಡೆಯುವವರೆಗೆ ಘಟನೆಗೆ ಯಾರು ಕಾರಣ ಎಂಬುದನ್ನು ಅಂತಿಮವಾಗಿ ಹೇಳಲು ಸಾಧ್ಯವಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಹಾಗೂ ಎಎಸ್ಪಿ ರಾನು ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾ ದೃಶ್ಯಗಳು, ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಕಲ್ಲು ತೂರಾಟದ ನಿಖರ ಸ್ವರೂಪ ಮತ್ತು ಘಟನೆಗೆ ಕಾರಣವೇನು ಎಂಬುದನ್ನು ತನಿಖೆಯ ಬಳಿಕ ಸ್ಪಷ್ಟಪಡಿಸುವ ನಿರೀಕ್ಷೆಯಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಭಟ್ಕಳ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ
