ಭಟ್ಕಳ- ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಹೆಗ್ಗುರುತಾಗಿ ಕನ್ನಡ ನಾಡು ನುಡಿಸೇವೆ ಮಾಡುತ್ತಿರುವ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂದು ಸಾಹಿತಿ ಡಾ. ಆರ್. ವಿ. ಸರಾಫ್ ನುಡಿದರು. ಅವರು ಇಲ್ಲಿನ ಶಿರಾಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನಾಚರಣೆಯ ಕಾರ್ಯಕ್ರಮವನ್ನು ಭುವನೇಶ್ವರಿ ದೇವಿಗೆ ಪುಷ್ಪರ್ಚನೆ ಸಲ್ಲಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು. ಕನ್ನಡ ನಾಡು ನುಡಿಯ ಹಿತ ಕಾಯುವ, ಕನ್ನಡಿಗರಲ್ಲಿ ಏಕತೆಯನ್ನು ಸಾಧಿಸುವ ದೂರದ್ರಷ್ಟಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿದೆ. ಪರಿಷತ್ತನ್ನು ಸ್ಥಾಪಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಮಿರ್ಜಾ ಇಸ್ಮಾಯಿಲ್ ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರಲ್ಲದೆ ಎಲ್ಲರೂ ಕನ್ನಡ ನಾಡು ನುಡಿಯ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಕನ್ನಡ ಕನ್ನಡಿಗ ಕರ್ನಾಟಕದ ಅಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡು ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ತು ಎಲ್ಲರನ್ನು ಒಳಗೊಂದು ಕನ್ನಡಕ್ಕಾಗಿ ಕೆಲಸ ಮಾಡುವ ಕನ್ನಡಿಗರ ಹೆಮ್ಮೆಯ ಸಂಸ್ಥೆಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಹಿತಿ ನಾರಾಯಣ ಯಾಜಿ ಶಿರಾಲಿ ಮಾತನಾಡಿ ನಾವೆಲ್ಲರೂ ನಮ್ಮ ನಮ್ಮ ನೆಲೆಯಲ್ಲಿ ಕನ್ನಡ ಸೇವೆ ಮಾಡಬೇಕು ಎಂದು ಕರೆ ನೀಡಿದರು. ಸಾಹಿತಿ
ಮಾನಸುತ ಶಂಭು ಹೆಗಡೆ ಸಾಂದರ್ಭಿಕವಾಗಿ ಮಾತನಾಡಿ ಚುಟುಕು ವಾಚನ ಮಾಡಿದರು. ಕಸಾಪ ಗೌರವ ಕೊಶಾಧ್ಯಕ್ಷ ಶ್ರೀಧರ್ ಶೇಟ್ ಶಿರಾಲಿ ಎಲ್ಲರನ್ನು ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಕಸಾಪ ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ವನಿತಾ ಶಂಭು ಹೆಗಡೆ ಉಪಸ್ಥಿತರಿದ್ದರು.